ಬಂಟ್ವಾಳ: ರಾಹುಲ್ ಗಾಂಧಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಆಕ್ರೋಶ – ಶಾಸಕ ಯಶಪಾಲ್ ಸುವರ್ಣ ವಿರುದ್ಧ ದೂರು ಸಲ್ಲಿಕೆ

ಬಂಟ್ವಾಳ : ಲೋಕಸಭಾ ವಿರೋಧ ಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶಪಾಲ್ ಸುವರ್ಣ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯವಾಗಿದ್ದು, ಅವರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು ಆಗ್ರಹಿಸಿದ್ದಾರೆ.
ಇಲ್ಲಿನ ಬಿ.ಸಿ.ರೋಡು ನಗರ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಇವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಪ್ರಸಕ್ತ ಶಾಂತಿಯುತವಾಗಿರುವ ಅವಿಭಜಿತ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಪ್ರಚೋದಿಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಗಲಭೆ ಎಬ್ಬಿಸುವ ಹುನ್ನಾರ ಮತ್ತು ಬಿಜೆಪಿಯಲ್ಲಿ ಅವರ ಅಸ್ತಿತ್ವ ಉಳಿಸಿಕೊಳ್ಳಲು ಇಂತಹ ಹೇಳಿಕೆ ನೀಡಿದ್ದಾರೆ ಎಂದು ಅವರು ಆರೋಪಿಸಿದರು.
ಬಂಟ್ವಾಳ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಲಾದ್ರು ಮಿನೇಜಸ್, ಪಾಣೆಮಂಗಳೂರು ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಬಿ.ಅಬ್ದುಲ್ಲ, ಪ್ರಮುಖರಾದ ಗಣೇಶ ಶೆಟ್ಟಿ ಗೋಳ್ತಮಜಲು, ಮಹಮ್ಮದ್ ನಂದಾವರ, ಸಿದ್ದಿಕ್ ಸರವು, ಸಿರಾಜ್ ಮದಕ, ಮಹಮ್ಮದ್ ಮಂಚಿ ಮತ್ತಿತರರು ನಿಯೋಗದಲ್ಲಿದ್ದರು.
