ಯೋಗಾಸನ ಸ್ಪರ್ಧೆಯಲ್ಲಿ ಮಣೂರು ಪಡುಕೆರೆಯ ವಿದ್ಯಾರ್ಥಿ ಮೊಹಮ್ಮದ್ ಕಾಮಿಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೋಟ: ಬ್ರಹ್ಮಾವರದಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಮಣೂರು ಪಡುಕೆರೆಯ ವಿದ್ಯಾರ್ಥಿ ಮೊಹಮ್ಮದ್ ಕಾಮಿಲ್ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ.
ವಿದ್ಯಾರ್ಥಿಯ ಈ ಗಮನಾರ್ಹ ಸಾಧನೆಯ ಹಿಂದೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ್ ಶೆಟ್ಟಿ ಅವರ ಸಮರ್ಪಕ ತರಬೇತಿ ಮತ್ತು ಮಾರ್ಗದರ್ಶನ ಪ್ರಮುಖ ಪಾತ್ರ ವಹಿಸಿದೆ.
ವಿದ್ಯಾರ್ಥಿಯ ಸಾಧನೆಯನ್ನು ಶಾಲೆಯ ಮಹಾಪೋಷಕರಾದ ಆನಂದ್ ಸಿ. ಕುಂದರ್, ಎಸ್ಡಿಎಂಸಿ ಅಧ್ಯಕ್ಷ ನಾಗರಾಜ, ಮುಖ್ಯಶಿಕ್ಷಕರಾದ ವಿವೇಕಾನಂದ ಹಾಗೂ ಶಾಲೆಯ ಅಧ್ಯಾಪಕ ವೃಂದ ಅಭಿನಂದಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
ಮೊಹಮ್ಮದ್ ಕಾಮಿಲ್ ಅವರ ಈ ಸಾಧನೆಯು ಶಾಲೆಗೆ ಕೀರ್ತಿ ತಂದುಕೊಟ್ಟಿದ್ದು, ಇತರ ವಿದ್ಯಾರ್ಥಿಗಳಿಗೂ ಕ್ರೀಡೆ ಹಾಗೂ ಯೋಗಾಸನ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರಣೆಯಾಗಿದೆ.
